【ವರದಿ : ಬಸಯ್ಯ ಜಿ ಎಂ】
ಕುರುಗೋಡು:ಪಟ್ಟಣದ ಸರಕಾರಿ ಐಟಿಐ ಕಾಲೇಜಿನಲ್ಲಿ ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ವಿಶ್ವ ಬಾಯಿ ಆರೋಗ್ಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ದಂತ ವೈದ್ಯಾಧಿಕಾರಿ ಡಾ. ಗಾಯಿತ್ರಿ ಮಾತನಾಡಿ, ಬಾಯಿಯ ಆರೋಗ್ಯದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲಕಾಲಕ್ಕೆ ದಂತ ವೈದ್ಯರ ಬಳಿ ಹಲ್ಲುಗಳ ಪರಿಶೀಲನೆ ಮಾಡಿಸಿಕೊಳ್ಳುವುದು ಅಗತ್ಯವೆಂದು ತಿಳಿಸಿದರು. ಧೂಮಪಾನ ಮತ್ತು ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ಸಲಹೆ ನೀಡಿದ ಅವರು, ಹಲ್ಲುಗಳ ಪೋಷಣೆಯ ಬಗ್ಗೆ ವಿಶೇಷ ಗಮನ ಹರಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಬಾಯಿ ಆರೋಗ್ಯ ಕಾರ್ಯಕ್ರಮ ಸಮಿತಿ ಬಳ್ಳಾರಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಕುರುಗೋಡು ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗೆ ದಂತ ತಪಾಸಣೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯ ತಿಮ್ಮರಾಜು, ಉಪನ್ಯಾಸಕರು ಸತೀಶ್, ಪ್ರಮೀಳಾ, ಪ್ರಥಮ ದರ್ಜೆ ಸಹಾಯಕ ಮಹೇಶ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಷಡಕ್ಷರಯ್ಯಸ್ವಾಮಿ, ಮಹೇಂದ್ರಕುಮಾರ್, ಆಪ್ತ ಸಮಾಲೋಚಕರಾದ ಮಹಬೂಬ್ ಭಾಷಾ, ಆಶಾ ಕಾರ್ಯಕರ್ತೆ ನೀಲಾವತಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
