(ವರದಿ:ಬಸಯ್ಯ ಜಿಎಂ)
ಕುರುಗೋಡು ತಾಲೂಕಿನ ಎಚ್. ವೀರಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆ, ಮಹಿಳೆಯರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪಿಡಿಒ ದೇವರಾಜ್ ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಗ್ರಾಮದಲ್ಲಿ ನೀರಿನ ಸಮರ್ಪಕ ಪೂರೈಕೆ ಇಲ್ಲದೆ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. “ದೇವರು ವರ ಕೊಟ್ಟರೆ ಪೂಜಾರಿ ಪ್ರಸಾದ ನೀಡ್ತಿಲ್ಲ” ಎಂಬಂತಾಗಿದೆ ನಮ್ಮ ಸ್ಥಿತಿ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಆಡಳಿತವು ಬೇಸಿಗೆ ಹಿನ್ನೆಲೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ನೀರು ಒದಗಿಸಲು ತುಂಗಭದ್ರಾ ಎಲ್ಎಲ್ಸಿ ಕಾಲುವೆಗಳ ಮೂಲಕ ಈ ತಿಂಗಳ 8ರಿಂದ ನೀರು ಬಿಡಲಾಗಿದೆ ಎಂದು ತಿಳಿಸಿದ್ದರೂ, ಅದರ ಪ್ರಯೋಜನ ಗ್ರಾಮಕ್ಕೆ ತಲುಪಿಲ್ಲ ಎಂದು ಆರೋಪಿಸಿದರು.
ಕಳೆದ ಎರಡು–ಮೂರು ವರ್ಷಗಳ ಹಿಂದೆ ಕಾಲುವೆಯಿಂದ ಕೆರೆಗೆ ನೀರು ತುಂಬಿಸಲು ಮೋಟಾರ್ ಮತ್ತು ಪೈಪ್ಲೈನ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಅವೈಜ್ಞಾನಿಕ ಪೈಪ್ಲೈನ್ ಅಳವಡಿಕೆಯಿಂದ ನೀರು ಸಮರ್ಪಕವಾಗಿ ಕೆರೆಗೆ ತಲುಪದೆ ಕೇವಲ ಮೂರು ಅಡಿ ಮಟ್ಟಕ್ಕೆ ಮಾತ್ರ ತುಂಬುತ್ತಿದೆ. ಇದರಿಂದ ಗ್ರಾಮದಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ.
ಇನ್ನೂ ಕೇವಲ ಐದು ದಿನಗಳ ಕಾಲ ಕಾಲುವೆಗಳಿಗೆ ನೀರು ಪೂರೈಕೆ ಇರುವುದಾಗಿ ತಿಳಿದು, ಮುಂದಿನ ದಿನಗಳಲ್ಲಿ ಬಿರು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೇಗೆ ನಿವಾರಣೆಯಾಗುತ್ತದೆ ಎಂಬ ಆತಂಕ ಗ್ರಾಮಸ್ಥರಲ್ಲಿ ಹೆಚ್ಚಾಗಿದೆ. ಪಂಚಾಯಿತಿ ಅಧಿಕಾರಿಗಳು ಸಮಸ್ಯೆ ಪರಿಹರಿಸುವ ಬದಲು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಸ್ಥರು ತಕ್ಷಣ ಕ್ರಮ ಕೈಗೊಂಡು ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.
