ವರದಿ : ಜಿ ಎಂ ಬಸಯ್ಯ
ಕುರುಗೋಡು ತಾಲೂಕಿನ ಖಾಸಗಿ ಶಾಲೆಗಳ ಹಿತಾಸಕ್ತಿಯನ್ನು ಕಾಪಾಡಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಕುರುಗೋಡು ಗ್ರಾಮಾಂತರ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟದ (ಕುಸ್ಮಾ) ನೂತನ ತಾಲೂಕು ಅಧ್ಯಕ್ಷ ಎಮ್ಮಿಗನೂರು ತಾಂಡವ ಕೃಷ್ಣ ಹೇಳಿದರು.
ಸಮೀಪದ ಕುಡಿತಿನಿಯ ಮದರ್ ತೆರೇಸಾ ಶಾಲೆಯಲ್ಲಿ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಅವರು ಮಾತನಾಡಿದರು.
ಸರ್ಕಾರಗಳು ಖಾಸಗಿ ಶಾಲೆಗಳ ಮೇಲೆ ದಿನಕ್ಕೊಂದು ಹೊಸ ಕಾನೂನುಗಳನ್ನು ಜಾರಿಗೆ ತಂದು ಅನೇಕ ತೊಂದರೆಗಳನ್ನು ಉಂಟುಮಾಡುತ್ತಿವೆ. ಸರ್ಕಾರಿ ಶಾಲೆಗಳಿಗೆ ನೀಡುವಂತೆ ಖಾಸಗಿ ಶಾಲೆಗಳಿಗೂ ಕೆಲವು ವಿನಾಯಿತಿಗಳನ್ನು ನೀಡಬೇಕು ಎಂದು ಅವರು ಆಗ್ರಹಿಸಿದರು.
ದೇಶಕ್ಕೆ ಸಮರ್ಥ ಹಾಗೂ ದಕ್ಷ ಪ್ರಜೆಗಳನ್ನು ರೂಪಿಸುವಲ್ಲಿ ಖಾಸಗಿ ಶಾಲೆಗಳ ಪಾತ್ರ ಮಹತ್ವದ್ದಾಗಿದೆ. ಮುಂದಿನ ದಿನಗಳಲ್ಲಿ ಕುರುಗೋಡು ತಾಲೂಕಿನಾದ್ಯಂತ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ನಂತರ ಗೌರವಾಧ್ಯಕ್ಷರಾಗಿ ಆಯ್ಕೆಯಾದ ರವಿರೆಡ್ಡಿ ಮಾತನಾಡಿ, ದೇಶದ ಪ್ರಗತಿಗೆ ಶಿಕ್ಷಣವಂತ ಸಮಾಜದ ಕೊಡುಗೆ ಅಪಾರವಾಗಿದೆ. ಖಾಸಗಿ ಶಾಲೆಗಳು ನಿರಂತರವಾಗಿ ಉತ್ತಮ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸರ್ಕಾರ ಕಠಿಣ ಕ್ರಮಗಳನ್ನು ಕೈಬಿಟ್ಟು ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ನಿಲ್ಲಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ರವಿರೆಡ್ಡಿ, ಅಧ್ಯಕ್ಷರಾಗಿ ಎಮ್ಮಿಗನೂರು ತಾಂಡವ ಕೃಷ್ಣ, ಉಪಾಧ್ಯಕ್ಷರಾಗಿ ಎಸ್. ಬಸವರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಕೆ. ಶಂಕರ್, ಖಜಾಂಚಿಯಾಗಿ ಕರೆಗೌಡ, ಕ್ರೀಡಾ ಕಾರ್ಯದರ್ಶಿಯಾಗಿ ಬಿ. ಸಿದ್ದಯ್ಯ, ಸಹ ಕಾರ್ಯದರ್ಶಿಯಾಗಿ ಜಡೇಶ್ ಸ್ವಾಮಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಭೀಮಲಿಂಗಾರೆಡ್ಡಿ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ವಿರುಪಾಕ್ಷಿ ಆಯ್ಕೆಯಾದರು.
ಆಯ್ಕೆಯಾದ ಪದಾಧಿಕಾರಿಗಳಿಗೆ ಶಾಲು ಹಾಗೂ ಹಾರ ಹಾಕಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕುಸ್ಮಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
