ವರದಿ :ಶಿವರಾಜ್ ಕನ್ನಡಿಗ:
ಕೊಟ್ಟೂರು: ಅಕ್ರಮ ಗೋ ಸಾಗಣೆ ಹಾಗೂ ಗೋ ಹತ್ಯೆ ತಡೆ ಕಾಯ್ದೆಯನ್ನು ಸಕಾರಾತ್ಮಕವಾಗಿ ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಕೊಟ್ಟೂರಿನಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾರ್ಯಕರ್ತರು ತಹಶೀಲ್ದಾರ್ರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಬಿಜೆಪಿ ಯುವ ಮುಖಂಡ ಎಂ. ಮಲ್ಲಿಕಾರ್ಜುನ್, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಅದರ ಆದೇಶಗಳು ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ ಎಂದು ಆರೋಪಿಸಿದರು. ಅಲ್ಲದೇ, ಪ್ರಸ್ತುತ ರಾಜ್ಯ ಸರ್ಕಾರ ಗೋ ಹಂತಕರಿಗೆ ರಕ್ಷಣೆಯಾಗಿ ನಿಂತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಿಡಿಕಾರಿದರು.
ಈ ಹಿನ್ನೆಲೆಯಲ್ಲಿ ಅಕ್ರಮ ಗೋ ಸಾಗಣೆ ಹಾಗೂ ಗೋ ಹತ್ಯೆ ತಡೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಸಂಬಂಧಿತ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಮಾನ್ಯ ತಹಶೀಲ್ದಾರ್ ಹಾಗೂ ಕೊಟ್ಟೂರು ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ವೀರೇಶ್ ಗೌಡ್ರು, ಎಂ.ಎಂ.ಜೆ ವಾಗೀಶ್, ಬಿ.ಆರ್. ವಿಕ್ರಂ ಬಸವರಾಜ್, ಕೊನಾಪುರ ಬಸವರಾಜ್, ನೂತನ್ ಪ್ರಸಾದ್, ಕಲ್ಲೇಶ್, ಪಾಟೀಲ್ ಹಾಗೂ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಕಸಲ್ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
