ಬಳ್ಳಾರಿ,ಜೂ.02:ಜಿಲ್ಲೆಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೆಸೆಯಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ನಿರಂತರ ಹಠಾತ್ ದಾಳಿ ನಡೆಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಟಾಸ್ಕ್ ಫೋರ್ಸ್ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆಯು ತನ್ನ ಇಲಾಖೆಯ ನಿಯಮಿತ ಕೆಲಸಗಳ ಜೊತೆಗೆ, ಬಾಲಕಾರ್ಮಿಕ ವ್ಯವಸ್ಥೆಯ ವಿರುದ್ಧ ವ್ಯಾಪಕ ಜನಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ತಹಶೀಲ್ದಾರರ ಅಧ್ಯಕ್ಷತೆಯಲ್ಲಿರುವ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ. ಕಳೆದ ಸಾಲಿನಲ್ಲಿ 33 ತಾಲೂಕು ಮಟ್ಟದ ಸಭೆಗಳನ್ನು ನಡೆಸಲಾಗಿದ್ದು, ಇನ್ಮುಂದೆ ತಾಲೂಕು ಮಟ್ಟದ ಸಭೆ ಹಾಗೂ ಹಠಾತ್ ದಾಳಿಗಳಲ್ಲಿ ತಾಲೂಕು ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್.ಎ ಅವರು ಮಾತನಾಡಿ, ರಾಷ್ಟಿçÃಯ ಮಕ್ಕಳ ಹಕ್ಕುಗಳ ಆಯೋಗದ ನಿರ್ದೇಶನದಂತೆ ಪ್ರತಿ ತಿಂಗಳು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳ ಮೂಲಕ ಇಲ್ಲಿಯವರೆಗೆ (2025-26 ನೇ ಸಾಲಿನಲ್ಲಿ) 20 ಆಕಸ್ಮಿಕ ದಾಳಿಗಳನ್ನು ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 58 ಬಾಲಕಾರ್ಮಿಕರನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿ ಮತ್ತು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಮಕ್ಕಳನ್ನು ದುಡಿಸಿಕೊಳ್ಳುತ್ತಿದ್ದ ಮಾಲೀಕರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 31 ಎಫ್.ಐ.ಆರ್ ದಾಖಲಿಸಲಾಗಿದ್ದು, ಕರಪತ್ರಗಳ ಮೂಲಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನಿರಂತರವಾಗಿ ನಡೆಯುವ ಆಕಸ್ಮಿಕ ದಾಳಿಗಳ ಸಂದರ್ಭದಲ್ಲಿ ರಕ್ಷಿಸಲಾಗುವ ಬಾಲಕಾರ್ಮಿಕರನ್ನು ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲೂö್ಯಸಿ) ಮುಂದೆ ಹಾಜರುಪಡಿಸಲು ಹಾಗೂ ಅವರನ್ನು ಮುಖ್ಯವಾಹಿನಿ ಶಾಲೆಗಳಿಗೆ ದಾಖಲಿಸಲು ವಾಹನದ ಅವಶ್ಯಕತೆ ಇದ್ದು, ದಾಳಿ ಮತ್ತು ರಕ್ಷಣಾ ಕಾರ್ಯಗಳಿಗಾಗಿ ಪ್ರತ್ಯೇಕ ವಾಹನವನ್ನು ಒದಗಿಸುವ ಕುರಿತು ಸಭೆಗೆ ತಿಳಿಸಿದರು.
ಸಮೀಕ್ಷೆ ಹಾಗೂ ಮಾಸಿಕ ಆಕಸ್ಮಿಕ ದಾಳಿಗಳ ಮೂಲಕ ಗುರುತಿಸಲ್ಪಡುವ ಮಕ್ಕಳಿಗೆ ತಾತ್ಕಾಲಿಕವಾಗಿ ವಿಶೇಷ ತರಬೇತಿ ನೀಡಿ, ಅವರ ಕಲಿಕಾ ಮಟ್ಟವನ್ನು ಸುಧಾರಿಸಿದ ನಂತರ ಮುಖ್ಯವಾಹಿನಿ ಶಾಲೆಗಳಿಗೆ ಸೇರಿಸಲು ಯೋಜಿಸಲಾಗಿದೆ. ಇದಕ್ಕಾಗಿ ಕೆ.ಎಂ.ಇ.ಆರ್.ಸಿ ಅಡಿಯಲ್ಲಿ ಈಗಾಗಲೇ ಅನುಮೋದನೆ ಪಡೆದಿರುವ ಬಾಲಕಾರ್ಮಿಕರ ವಿಶೇಷ ತರಬೇತಿ ಕೇಂದ್ರವನ್ನು ಶೀಘ್ರದಲ್ಲೇ ಪ್ರಾರಂಭಿಸುವ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:
ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಅಧ್ಯಕ್ಷರೂ ಆದ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ಇದೇ ಜೂನ್ 12 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಜಂಟಿ ಸಹಯೋಗದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ‘ಅಂತರಾಷ್ಟಿçÃಯ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದಕ್ಕೂ ಶಾಲಾ ಮಕ್ಕಳಿಂದ ಜನಜಾಗೃತಿ ಜಾಥಾ ನಡೆಯಲಿದೆ. ಇದಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಹಾಗೂ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಬಾಲಕಾರ್ಮಿಕ ಕಾಯ್ದೆ 1986ರ ಕಲಂ 17ರಡಿ ಕಂದಾಯ, ಪಂಚಾಯತ್ ರಾಜ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ಒಟ್ಟು 11 ಇಲಾಖೆಗಳ ಅಧಿಕಾರಿಗಳಿಗೆ ಇನ್ಸ್ಪೆಕ್ಟರ್ ಅಧಿಕಾರ ನೀಡಲಾಗಿದೆ. ಈ ಅಧಿಕಾರಿಗಳು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಹಾಗೂ ಆಕಸ್ಮಿಕ ದಾಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಪ್ಪು ಮಾಡಿದವರ ವಿರುದ್ಧ ಮೊಕದ್ದಮೆ ಹೂಡುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಬಾಲಕಾರ್ಮಿಕತೆಯಿಂದ ಮುಕ್ತಗೊಂಡು ಸರ್ಕಾರಿ ಶಾಲೆಗೆ ದಾಖಲಾದ ಬಡ ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಎಸ್ಸಿ/ಎಸ್ಟಿ/ಬಿಸಿಎಂ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲಿ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಕಲ್ಯಾಣ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ಥಳೀಯ ಕಿರಾಣಿ ಅಂಗಡಿ ಹಾಗೂ ವಿವಿಧ ಉದ್ದಿಮೆಗಳ ಮಾಲೀಕರಿಗೆ ಬಾಲಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) ತಿದ್ದುಪಡಿ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಬೇಕು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯನ್ನು 2025-26 ನೇ ಸಾಲಿಗೆ ಸಹಕಾರ ಸಂಘಗಳ ನೋಂದಣಿ ಕಾಯ್ದೆಯನ್ವಯ ನವೀಕರಿಸುವ ಕುರಿತು ಹಾಗೂ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಜಾಗೃತಿ ಕಾರ್ಯಕ್ರಮಗಳಿಗಾಗಿ ಪ್ರಸಿದ್ಧ ಕಂಪನಿಗಳಿAದ ಸಿ.ಎಸ್.ಆರ್ ಅನುದಾನ ಮತ್ತು ಗಣ್ಯ ವ್ಯಕ್ತಿಗಳಿಂದ ದೇಣಿಗೆ ಸಂಗ್ರಹ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷಿö್ಮ ಮೈದೂರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲಾ ತಾಲ್ಲೂಕು ತಹಶೀಲ್ದಾರರು ಹಾಜರಿದ್ದರು.
