ಬಳ್ಳಾರಿ,ಜೂ.07:ಪರಿಸರ ಮಾಲಿನ್ಯ, ಜಾಗತಿಕ ತಾಪಮಾನ ಏರಿಕೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ನಾಶದಂತಹ ಗಂಭೀರ ಸಮಸ್ಯೆಗಳ ವಿರುದ್ಧ ಹೋರಾಡುವುದು ಇಂದಿನ ತುರ್ತು ಅಗತ್ಯವಾಗಿದೆ. ಕಾಡಿನ ಹಸಿರು ನಮ್ಮೆಲ್ಲರ ಉಸಿರಾಗಿದ್ದು, ಪ್ರತಿಯೊಬ್ಬರೂ ಮರಗಳನ್ನು ಬೆಳೆಸುವ ಮೂಲಕ ಭೂಮಿಯ ತಾಪಮಾನವನ್ನು ಇಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಕರೆ ನೀಡಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ‘ವಿಶ್ವ ಪರಿಸರ ದಿನಾಚರಣೆ’ ಅಂಗವಾಗಿ ಶನಿವಾರ ಸಸಿ ನೆಟ್ಟು ಬಳಿಕ ಅವರು ಮಾತನಾಡಿದರು.
ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದ್ದು, ಗಾಳಿ, ನೀರು, ಮಣ್ಣು ಮತ್ತು ಜೀವ ವೈವಿಧ್ಯತೆಯ ಪ್ರಾಮುಖ್ಯತೆಯನ್ನು ಜನರಿಗೆ ಅರ್ಥೈಸಲು ಇದು ಪ್ರಮುಖ ವೇದಿಕೆಯಾಗಿದೆ ಎಂದು ತಿಳಿಸಿದರು.
ಪರಿಸರ ಸಂರಕ್ಷಣೆಗಾಗಿ ಮರಗಳನ್ನು ಬೆಳೆಸುವುದು, ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವುದು ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ಮಿತವಾಗಿ ಬಳಸಿ, ಮರುಬಳಕೆ ಮಾಡಲು ಸಾರ್ವಜನಿಕರು ಪ್ರೇರೇಪಿತರಾಗಬೇಕು ಎಂದರು.
‘ಕಸದಲ್ಲಿ ರಸ ಎನ್ನುವಂತೆ’ ನಮ್ಮ ಸುತ್ತಮುತ್ತಲಿನ ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪರಿಸರ ಸಂರಕ್ಷಣೆ ಮಾಡಬೇಕು ಹಾಗೂ ಭೂಮಾಲಿನ್ಯವನ್ನು ತಡೆಗಟ್ಟಬೇಕು. ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡರೆ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಗಟ್ಟಬಹುದು. ಮುಂದಿನ ಪೀಳಿಗೆಗೆ ಸ್ವಚ್ಛ ಮತ್ತು ಹಸಿರು ಭೂಮಿಯನ್ನು ಕೊಡುಗೆಯಾಗಿ ನೀಡಲು ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಅರಣ್ಯವಿಲ್ಲದೆ ಮಳೆಯಿಲ್ಲ, ಮಳೆಯಿಲ್ಲದೆ ಬೆಳೆಯಿಲ್ಲ ಎಂದು ಅವರು ವಿವರಿಸಿದರು.
ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯ ಸಂಕಲ್ಪ ತೊಟ್ಟು ಗಣ್ಯರು ಸಸಿಗಳನ್ನು ನೆಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್. ಬಸರೆಡ್ಡಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಆರ್. ಅಬ್ದುಲ್ಲಾ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ವೀರೇಂದ್ರ ಕುಮಾರ್, ಸಹಾಯಕ ಆಡಳಿತ ಅಧಿಕಾರಿ ನವೀನ್ ಕುಮಾರ್, ವೈದ್ಯಾಧಿಕಾರಿಗಳಾದ ಡಾ. ನರಸಿಂಹ ಮೂರ್ತಿ, ಡಾ. ಭಾರತಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕ ಜಡಗಣ್ಣನವರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಪ್ರಥಮ ದರ್ಜೆ ಸಹಾಯಕ ಕೃಷ್ಣನಾಯ್ಕ ಸೇರಿದಂತೆ ಇಲಾಖೆಯ ಇತರೆ ಸಿಬ್ಬಂದಿಗಳು ಇದ್ದರು.
