ವರದಿ: ಶಿವರಾಜ್ ಕನ್ನಡಿಗ
ಕೊಟ್ಟೂರು: ಸಾರ್ವಜನಿಕ ಸಮಸ್ಯೆಗಳ ಕುರಿತು ನಿರಂತರವಾಗಿ ಧ್ವನಿ ಎತ್ತುತ್ತಿದ್ದ “ಹಾಯ್ ಸಂಡೂರ್” ವರದಿಯ ಪರಿಣಾಮವಾಗಿ ಕೊನೆಗೂ ಕೊಟ್ಟೂರು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.
ಕೊಟ್ಟೂರು ಪಟ್ಟಣದ ದ.ರಾ. ಬೇಂದ್ರೆ ಶಾಲೆ ಸಮೀಪದಲ್ಲಿರುವ ಮುಖ್ಯ ಚರಂಡಿ ಕಸ, ಕಡ್ಡಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಸಂಪೂರ್ಣವಾಗಿ ಮುಚ್ಚಿ ಹೋಗಿದ್ದು, ದುರ್ವಾಸನೆ ಬೀರುತ್ತಿತ್ತು. ಇದರಿಂದ ಶಾಲಾ ವಿದ್ಯಾರ್ಥಿಗಳು, ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದರು.
ಸಾರ್ವಜನಿಕರ ಸಮಸ್ಯೆಯಾಗಿ ಪರಿಣಮಿಸಿದ್ದ ಈ ಚರಂಡಿ ಅವ್ಯವಸ್ಥೆ ಕುರಿತು “ಹಾಯ್ ಸಂಡೂರ್” ನಿರಂತರವಾಗಿ ವರದಿ ಪ್ರಕಟಿಸಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳ ನಿರ್ಲಕ್ಷ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿತ್ತು.
ವರದಿಯ ಬಿಸಿ ತಟ್ಟುತ್ತಿದ್ದಂತೆಯೇ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಚರಂಡಿಯಲ್ಲಿ ಬ್ಲಾಕ್ ಆಗಿದ್ದ ಕಸ ಹಾಗೂ ಪ್ಲಾಸ್ಟಿಕ್ ತ್ಯಾಜ್ಯವನ್ನು ತೆರವುಗೊಳಿಸುವ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದಾರೆ.
ಸಮಸ್ಯೆಗೆ ಸ್ಪಂದಿಸಿ ಕ್ರಮ ಕೈಗೊಂಡ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, “ಹಾಯ್ ಸಂಡೂರ್” ಪತ್ರಿಕೆಯ ನಿರಂತರ ಹೋರಾಟಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
