ಬಳ್ಳಾರಿ,ಜೂ.22:ಜಿಲ್ಲಾ ನ್ಯಾಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ‘ಅಂತರರಾಷ್ಟ್ರೀಯ ಯೋಗ ದಿನ’ ಆಚರಿಸಲಾಯಿತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿದ್ದಲಿಂಗ ಪ್ರಭು ಅವರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ನ್ಯಾಯಾಂಗ ಕ್ಷೇತ್ರದಲ್ಲಿ ಕೆಲಸ ಮಾಡುವ ಅಧಿಕಾರಿಗಳು, ವಕೀಲರು ಮತ್ತು ಸಿಬ್ಬಂದಿ ನಿರಂತರ ಮಾನಸಿಕ ಒತ್ತಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ ಶಾಂತಿ, ದೈಹಿಕ ಆರೋಗ್ಯ ಮತ್ತು ಕೆಲಸದಲ್ಲಿ ಏಕಾಗ್ರತೆ ಹೆಚ್ಚುತ್ತದೆ. ಪ್ರತಿಯೊಬ್ಬರೂ ಯೋಗವನ್ನು ತಮ್ಮ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಪತಂಜಲಿ ಯೋಗ ಶಿಕ್ಷಣ ಸಮಿತಿ ಬಳ್ಳಾರಿ ಶಾಖೆಯ ಸದಸ್ಯರೂ ಹಾಗೂ ಬಳ್ಳಾರಿ ವಕೀಲರ ಸಂಘದ ಅಧ್ಯಕ್ಷರೂ ಆದ ರಾಮಬ್ರಹ್ಮಂ ಅವರು ಮಾತನಾಡಿ, ನ್ಯಾಯಾಲಯದ ವತಿಯಿಂದ ಇಂತಹ ಉತ್ತಮ ಆರೋಗ್ಯ ಪೂರಕ ಕಾರ್ಯಕ್ರಮ ಹಮ್ಮಿಕೊಂಡಿದ್ದಕ್ಕೆ ಧನ್ಯವಾದ ಸಮರ್ಪಿಸಿದರು. ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಿಸುವುದರ ಜೊತೆಗೆ ಮಾನಸಿಕ ನೆಮ್ಮದಿ ಕಂಡುಕೊಳ್ಳಲು ಸಹಾಯವಾಗುತ್ತದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ನೆರೆದಿದ್ದವರಿಗೆ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮದ ಮಹತ್ವವನ್ನು ತಿಳಿಸಿಕೊಟ್ಟು, ಪ್ರಾಯೋಗಿಕವಾಗಿ ಯೋಗಾಭ್ಯಾಸ ಮಾಡಿಸಿದರು.
ಭಾಗವಹಿಸಿದವರೆಲ್ಲರೂ ದೇಹಕ್ಕೆ ಪೂರಕವಾದ ವಿವಿಧ ಆಸನಗಳು, ಮನಸ್ಸನ್ನು ಪ್ರಶಾಂತಗೊಳಿಸುವ ಅನುಲೋಮ-ವಿಲೋಮ, ಕಪಾಲಭಾತಿ ಪ್ರಾಣಾಯಾಮ ಮತ್ತು ಧ್ಯಾನವನ್ನು ಮಾಡಿದರು.
ಕಾರ್ಯಕ್ರಮದಲ್ಲಿ ಬಳ್ಳಾರಿ ನಗರದ 1 ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಹೆಚ್.ಎ.ಮೋಹನ್, 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಪ್ರಮೋದ.ಬಿ.ಜಿ., ಜಿಲ್ಲಾ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ವೆಂಕಟೇಶ್, ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಇಬ್ರಾಹಿಂ ಮುಜಾವರ್, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ನಸ್ರತ್ ಮುಖಾರ್ ಅಹ್ಮದ್ ಖಾನ್, ಎರಡನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಪ್ರಿಯಾಂಕ ಟಿ.ಕೆ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಪ್ರಿನ್ಸಿಪಲ್ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಧೀಶರಾದ ನಾಗೇಶ್ ನಾಯ್ಕ, 1 ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಿದ್ದಲಿಂಗಯ್ಯ ಗಂಗಾಧರಮಠ, 2 ನೇ ಅಪರ ಸಿವಿಲ್ ನ್ಯಾಯಾಧೀಶರಾದ ದೇವರೆಡ್ಡಿ, 4 ನೇ ಅಪರ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮಿ ಭವಾನಿ ಶಂಕ್ರಪ್ಪ, 5 ನೇ ಅಪರ ಸಿವಿಲ್ ನ್ಯಾಯಾಧೀಶರಾದ ಕೌಶಲ್ ಸೇರಿದಂತೆ ಬಳ್ಳಾರಿ ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ಮತ್ತು ಕಿರಿಯ ವಕೀಲರು ಹಾಗೂ ನ್ಯಾಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತ್ತು ಪತಂಜಲಿ ಯೋಗ ಶಿಕ್ಷಣಾ ಸಮಿತಿ ಬಳ್ಳಾರಿ ಶಾಖೆಯ ಸದಸ್ಯರು ಮತ್ತು ಪದಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಯೋಗಾಸನ ಮಾಡಿದರು.
