ವರದಿ :ಜಿ ಎಂ ಬಸಯ್ಯ
ಕುರುಗೋಡು: ಮೊಹರಂ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಭಾವೈಕ್ಯತೆಯೊಂದಿಗೆ ಆಚರಿಸುವಂತೆ ಡಿವೈಎಸ್ಪಿ ಪ್ರಸಾದ್ ಗೋಖಲೆ ಸಾರ್ವಜನಿಕರಿಗೆ ಕರೆ ನೀಡಿದರು.
ಕುರುಗೋಡು ಪೊಲೀಸ್ ಠಾಣೆ ಆವರಣದಲ್ಲಿ ಮೊಹರಂ ಹಬ್ಬದ ಅಂಗವಾಗಿ ಪಟ್ಟಣ ಹಾಗೂ ಗ್ರಾಮೀಣ ಭಾಗದ ಹಿಂದೂ-ಮುಸ್ಲಿಂ ಮುಖಂಡರು ಮತ್ತು ಯುವ ಮುಖಂಡರ ಸಮ್ಮುಖದಲ್ಲಿ ಶಾಂತಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಡಿವೈಎಸ್ಪಿ ಪ್ರಸಾದ್ ಗೋಖಲೆ ಅವರು, ಹಿಂದೂ-ಮುಸ್ಲಿಂ ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮೊಹರಂ ಹಬ್ಬವನ್ನು ಪಟ್ಟಣ ಮತ್ತು ಗ್ರಾಮಗಳ ಎಲ್ಲಾ ಸಮುದಾಯದ ಜನರು ಭೇದಭಾವವಿಲ್ಲದೆ ಶಾಂತಿಯುತವಾಗಿ ಆಚರಿಸಬೇಕು ಎಂದು ಹೇಳಿದರು.
ಪ್ರತಿವರ್ಷದಂತೆ ಈ ವರ್ಷವೂ ಹಬ್ಬವನ್ನು ಶಾಂತ ರೀತಿಯಲ್ಲಿ ಆಚರಿಸುವ ಮೂಲಕ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು. ಯಾವುದೇ ಗ್ರಾಮಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಎಲ್ಲರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ತಿಳಿಸಿದರು.
ನಂತರ ಮಾತನಾಡಿದ ಸಿಪಿಐ ಬಾಳನಗೌಡ ಮಾನಶೆಟ್ಟಿ, ನಮ್ಮ ದೇಶದಲ್ಲಿ ಹಬ್ಬಗಳು ಭಾವೈಕ್ಯತೆಯ ಸಂಕೇತವಾಗಿದ್ದು, ಎಲ್ಲ ಧರ್ಮದ ಜನರು ಒಗ್ಗಟ್ಟಿನಿಂದ ಹಬ್ಬಗಳನ್ನು ಆಚರಿಸಬೇಕು ಎಂದು ಹೇಳಿದರು. ಕೋಮು ಗಲಭೆಗಳಿಗೆ ಅವಕಾಶ ನೀಡದೆ, ಧಾರ್ಮಿಕ ನಂಬಿಕೆ ಮತ್ತು ಪರಂಪರೆಯನ್ನು ಗೌರವಿಸುವ ಮೂಲಕ ಸಹೋದರತ್ವದ ಮನೋಭಾವದಿಂದ ಮೊಹರಂ ಹಬ್ಬವನ್ನು ಆಚರಿಸುವಂತೆ ಕರೆ ನೀಡಿದರು.
ಪಿಎಸ್ಐ ಸುಪ್ರೀತ್ ವಿರುಪಕ್ಷಪ್ಪ ಮಾತನಾಡಿ, ಹಿಂದೂ-ಮುಸ್ಲಿಂ ಸೌಹಾರ್ದತೆಗೆ ಪ್ರತೀಕವಾಗಿರುವ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿಯುತವಾಗಿ ಆಚರಿಸಿ, ಸಮಾಜದಲ್ಲಿ ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಪುರಸಭೆ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷರು, ಅಪರಾಧ ವಿಭಾಗದ ಪೊಲೀಸ್ ಅಧಿಕಾರಿಗಳು, ಎಮ್ಮಿಗನೂರು, ಎಚ್. ವೀರಾಪುರ ಸೇರಿದಂತೆ ವಿವಿಧ ಗ್ರಾಮಗಳ ಪ್ರಮುಖರು ಹಾಗೂ ಮುಖಂಡರು ಉಪಸ್ಥಿತರಿದ್ದರು. ಶಾಂತಿ ಸಭೆಯಲ್ಲಿ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.
