ಬಳ್ಳಾರಿ,ಜು.10:
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭಗೊAಡಿದ್ದು, ಬೂತ್ ಮಟ್ಟದ ಅಧಿಕಾರಿಗಳು ಈಗಾಗಲೇ ನೀಡಿರುವ ಗಣತಿ ನಮೂನೆಗಳನ್ನು ಭರ್ತಿ ಮಾಡಿ ಮರಳಿ ಅವರಿಗೆ ಶೀಘ್ರವೇ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಮಹಮ್ಮದ್ ಹಾರೀಸ್ ಸುಮೇರ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕನಕದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಸ್ಐಆರ್ ಜಾಗೃತಿ ಅಂಗವಾಗಿ ತ್ರಿಚಕ್ರ ವಾಹನ ರ್ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜುಲೈ 29 ರ ವರೆಗೆ ನಡೆಯುವ ಎಸ್ಐಆರ್ ಗಣತಿ ನಮೂನೆ ವಿತರಣೆ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಎಸ್ಐಆರ್ ಗಣತಿ ನಮೂನೆ ವಿತರಿಸುತ್ತಿದ್ದಾರೆ. ತಮಗೆ ನೀಡಿರುವ ಗಣತಿ ನಮೂನೆ ಫಾರ್ಮ್ ಗಳನ್ನು ಶೀಘ್ರವೇ ಭರ್ತಿ ಮಾಡಿ ನೀಡಬೇಕು. ಕೊನೆಯವರೆಗೂ ಕಾಯುವುದು ಬೇಡ ಎಂದು ತಿಳಿಸಿದರು.
ಜಿಲ್ಲೆಯ ಯಾವುದೇ ಒಬ್ಬ ವಿಶೇಷಚೇತನರೂ ಈ ಎಸ್ಐಆರ್ ಪ್ರಕ್ರಿಯೆಯಿಂದ ವಂಚಿತರಾಗಬಾರದು. ಜಿಲ್ಲೆಯಲ್ಲಿನ ಎಂ.ಆರ್.ಡಬ್ಲ್ಯೂ ಹಾಗೂ ವಿ.ಆರ್.ಡಬ್ಲ್ಯೂ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ ನೀಡಬೇಕು. ಅರ್ಹರ ಪಟ್ಟಿಯ ಆಧಾರದ ಮೇಲೆ ಪ್ರತಿಯೊಬ್ಬರ ಮನೆ ಬಾಗಿಲಿಗೆ ಹೋಗಿ ಎಸ್ಐಆರ್ ಪ್ರಕ್ರಿಯೆ ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಎಸ್ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಇಲ್ಲದಿದ್ದರೆ 2002 ರ ಮತದಾರರ ಪಟ್ಟಿಯಲ್ಲಿ ಮ್ಯಾಪಿಂಗ್ ಆಗದೇ ಇರುವವರ ಹೆಸರು ಮತದಾರರ ಪಟ್ಟಿಯಲ್ಲಿ ಕೈತಪ್ಪುವ ಸಂಭವವಿರುತ್ತದೆ. ಇದರಿಂದಾಗಿ ಸರ್ಕಾರಿ ಸೌಲಭ್ಯಗಳು ಸಿಗದಂತಾಗುತ್ತದೆ. ಈ ಕುರಿತು ಯಾವುದೇ ಸಂಶಯಗಳಿದ್ದಲ್ಲಿ ತಮ್ಮ ವ್ಯಾಪ್ತಿಯ ಬಿಎಲ್ಒ ಅಥವಾ ತಹಶೀಲ್ದಾರರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಅರಿವು ಮೂಡಿಸಿದರು.
ಕುಟುಂಬದ ಹಿರಿಯರು ಅಥವಾ ಪೋಷಕರು ಈ ಹಿಂದೆ 2002ರ ಅವಧಿಯಲ್ಲಿ ಭಾರತದ ಯಾವುದೇ ಭಾಗದಲ್ಲಿ ಮತ ಚಲಾಯಿಸಿದ್ದರೆ, ಆ ವಿವರಗಳನ್ನು ಈ ಅರ್ಜಿಯ ಎಡಭಾಗದಲ್ಲಿ ಭರ್ತಿ ಮಾಡಬೇಕಾಗುತ್ತದೆ. 2002ರ ಅವಧಿಯಲ್ಲಿ ಮತ ಚಲಾಯಿಸದೇ ಇರುವವರು ಅರ್ಜಿಯ ಬಲಭಾಗದಲ್ಲಿ ತಮ್ಮ ಪೋಷಕರ (ತಂದೆ, ತಾಯಿ, ಅಜ್ಜ ಅಥವಾ ಅಜ್ಜಿ) ವಿವರಗಳನ್ನು ಭರ್ತಿ ಮಾಡಿ ನೀಡಬೇಕು ಎಂದು ವಿವರಿಸಿದರು.
ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಅವರು ಮಾತನಾಡಿ, ಪ್ರತಿ ಗ್ರಾಮಗಳಲ್ಲಿ ಕಾರ್ಯನಿರ್ವಹಿಸುವ ವಿ.ಆರ್.ಡಬ್ಲ್ಯೂ ಸಿಬ್ಬಂದಿ ಕಡ್ಡಾಯವಾಗಿ ಪ್ರತಿಯೊಂದು ಮನೆಗೂ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕು. ಜಿಲ್ಲೆಯಲ್ಲಿರುವ ಯಾವುದೇ ವಿಶೇಷಚೇತನರು ಈ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಶೀಲನೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಸಿಬ್ಬಂದಿಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಬಳಿಕ ಗಣ್ಯರು ಎಸ್ಐಆರ್ ತ್ರಿಚಕ್ರ ವಾಹನ ರ್ಯಾಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ರ್ಯಾಲಿಯು ಕನಕ ದುರ್ಗಮ್ಮ ದೇವಸ್ಥಾನದ ಆವರಣದಿಂದ ಆರಂಭಗೊAಡು ಗಡಿಗಿ ಚೆನ್ನಪ್ಪ ವೃತ್ತದ ಮಾರ್ಗವಾಗಿ ರೈಲ್ವೆ ಸ್ಟೇಶನ್ ರಸ್ತೆ ಮೂಲಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿ ಮುಕ್ತಾಯಗೊಂಡಿತು. ರ್ಯಾಲಿಯಲ್ಲಿ ವಿಶೇಷ ಚೇತನರ ಕೈಯಲ್ಲಿ ಎಸ್ಐಆರ್ ಕುರಿತ ಜಾಗೃತಿ ಫಲಕಗಳು ಗಮನಸೆಳೆದವು.
ಈ ವೇಳೆ ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ ಬಸವರಾಜ ಹಿರೇಮಠ್, ಬಳ್ಳಾರಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಐ ಬಾರಿಕರ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಸೇರಿಂದತೆ ಜಿಪಂ ಅಧಿಕಾರಿ- ಸಿಬ್ಬಂದಿ ಹಾಗೂ ವಿಶೇಷ ಚೇತನರು, ಸಾರ್ವಜನಿಕರು ಭಾಗವಹಿಸಿದ್ದರು.
