[ವರದಿ : ಜಿ ಎಂ ಬಸಯ್ಯ]
ಕುರುಗೋಡು: ತಾಲೂಕು ಆಡಳಿತ ಹಾಗೂ ಕೃಷಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬರಗಾಲ ನಿರ್ವಹಣೆ ಮತ್ತು ರೈತರ ಸಮಸ್ಯೆಗಳ ಕುರಿತು ಮಂಗಳವಾರ ತಾಲೂಕು ಕಚೇರಿ ಆವರಣದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ನರಸಪ್ಪ, ಮಳೆ ಕೊರತೆಯಿಂದ ತಾಲೂಕಿನಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜಲಾಶಯಗಳಲ್ಲಿನ ನೀರಿನ ಸಂಗ್ರಹ ಕುಸಿದಿದ್ದು, ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮೂಲಕ ರೈತರಿಗೆ ಅಗತ್ಯ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ರೈತರು ಬೆಳೆ ವಿಮೆ ಕುರಿತು ಹಲವು ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಕಂತು ಪಾವತಿಸುವುದು ಕಷ್ಟವಾಗಿದ್ದು, ಈ ಬಾರಿ ಸರ್ಕಾರವೇ ಉಚಿತವಾಗಿ ಬೆಳೆ ವಿಮೆ ಮಾಡಿಸಬೇಕು ಎಂದು ಒತ್ತಾಯಿಸಿದರು. ಅಧಿಕಾರಿಗಳ ಮೂಲಕ ಮಾಹಿತಿ ಸಂಗ್ರಹಿಸಿ ಎಲ್ಲ ಅರ್ಹ ರೈತರಿಗೆ ಬೆಳೆ ವಿಮೆ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದರು.
ಬೆಳೆ ವಿಮೆ ಕಂತಿನ ಮೊತ್ತ ಹಾಗೂ ಇತರ ತಾಂತ್ರಿಕ ಸಮಸ್ಯೆಗಳ ಕುರಿತು ರೈತರು ಪ್ರಶ್ನೆ ಎತ್ತಿದಾಗ, ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಈ ವಿಷಯವನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ ಗಜ್ಜಪ್ಪ, ಉಪ ಕೃಷಿ ನಿರ್ದೇಶಕ ಡಾ. ಮಂಜುನಾಥ, ಕೃಷಿ ವಿಜ್ಞಾನ ಕೇಂದ್ರದ ಡಾ. ರವಿ, ಡಾ. ಕೃಷ್ಣಮೂರ್ತಿ, ಕುರುಗೋಡು ರೈತ ಸಂಪರ್ಕ ಕೇಂದ್ರದ ದೇವರಾಜ್, ಕೋಳೂರು ರೈತ ಸಂಪರ್ಕ ಕೇಂದ್ರದ ಜೆ. ಅರುಣಾ, ಇಲಾಖೆಯ ಸಿಬ್ಬಂದಿ, ರೈತ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.
