ಚಿತ್ರದುರ್ಗ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದ ತಂಡ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಹಾನಿಯನ್ನು ಪರಿಶೀಲಿಸಿತು. ಈ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಂಗಾರು ಹನುಮಂತ ರೈತರ ಸಮಸ್ಯೆಗಳನ್ನು ಆಲಿಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನೀರಿನ ಅಭಾವದಿಂದ ಹಾನಿಗೊಳಗಾದ ಹೊಲಗಳು, ಒಣಗುತ್ತಿರುವ ಅಡಿಕೆ ತೋಟಗಳು ಹಾಗೂ ಬೆಳೆ ನಷ್ಟವನ್ನು ಪರಿಶೀಲಿಸಿದ ತಂಡ, ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಿ ಅವರ ಅಹವಾಲುಗಳನ್ನು ಆಲಿಸಿತು. ವರ್ಷಗಳ ಕಾಲ ಶ್ರಮಪಟ್ಟು ಅಪಾರ ಹಣ ಹೂಡಿಕೆ ಮಾಡಿ ಬೆಳೆಸಿದ ಅಡಿಕೆ ತೋಟಗಳು ಇಂದು ರೈತರ ಕಣ್ಣೆದುರೇ ಒಣಗುತ್ತಿರುವುದು ನೋವಿನ ಸಂಗತಿ ಎಂದು ಬಂಗಾರು ಹನುಮಂತ ಹೇಳಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಬರ ಹಾಗೂ ಬೆಳೆ ನಷ್ಟದಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ, ಸರ್ಕಾರದಿಂದ ಅಗತ್ಯ ನೆರವು ಹಾಗೂ ತ್ವರಿತ ಪರಿಹಾರ ಕ್ರಮಗಳು ಕಾಣಿಸುತ್ತಿಲ್ಲ. ರೈತರ ಸಮಸ್ಯೆಗಳಿಗೆ ಆದ್ಯತೆ ನೀಡುವ ಬದಲು ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದರು.
ಬೆಳೆ ಹಾನಿಯ ಕುರಿತು ತಕ್ಷಣ ಸಮಗ್ರ ಸಮೀಕ್ಷೆ ನಡೆಸಿ, ನಷ್ಟ ಅನುಭವಿಸಿದ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕು. ಸಂಕಷ್ಟದಲ್ಲಿರುವ ಅನ್ನದಾತರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಮೊದಲ ಕರ್ತವ್ಯವಾಗಿದ್ದು, ರೈತರ ಪರವಾಗಿ ಭಾರತೀಯ ಜನತಾ ಪಕ್ಷ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಬೈರತಿ ಬಸವರಾಜ್, ಶಾಸಕರಾದ ಬಿ.ಪಿ. ಹರೀಶ್, ಕೃಷ್ಣ ನಾಯಕ್, ಕೆ.ಎಸ್. ನವೀನ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಮಾರಸ್ವಾಮಿ, ರಾಮದಾಸ್, ಸಂಬಂಧಿತ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
