ಬಳ್ಳಾರಿ,ಆ.07: ಜಿಲ್ಲೆಯಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿವೀಕ್ಷಣೆ ನಡೆಸುವ ಸಂಬಂಧ ನಿಯೋಜಿಸಿರುವ ಬಳ್ಳಾರಿ ಜಿಲ್ಲಾ ಅತಿವೃಷ್ಠಿ ಮತ್ತು ಬರ ಪರಿಸ್ಥಿತಿ ನಿರ್ವಹಣೆಯ ಮೇಲುಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ಸಂಡೂರು ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಸ್ಥಳೀಯ ಶಾಸಕರು ಮತ್ತು ಜಿಲ್ಲಾಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಬರ ಅಧ್ಯಯನ ನಡೆಸಿದರು.
ಈ ವೇಳೆ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳ ಸೂಚನೆಯಂತೆ ಸರ್ಕಾರವು ರೈತರ ಬೆಂಬಲಕ್ಕೆ ನಿಲ್ಲಲಿದ್ದು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಂಪುಟ ಸಭೆಯ ತೀರ್ಮಾನ ಮತ್ತು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.
ಬಳ್ಳಾರಿಗೆ ಹೋಲಿಸಿದರೆ ಸಂಡೂರಿನಲ್ಲಿ ಮಳೆಯಾಶ್ರಿತ ಸಣ್ಣ ಹಾಗೂ ಅತಿ ಸಣ್ಣ ರೈತರೇ ಹೆಚ್ಚಾಗಿದ್ದು, ಬರಪರಿಸ್ಥಿತಿ ತೀವ್ರವಾಗಿದೆ. ಒಂದು ಅಥವಾ ಐದು ಎಕರೆ ಒಳಗಿನ ಹಿಡುವಳಿದಾರರಿಗೆ ಕೃಷಿ ನಷ್ಟದಿಂದ ಬದುಕು ಸಾಗಿಸುವುದು ಕಷ್ಟವಾಗಿದೆ. ಈ ಕುರಿತು ಶೀಘ್ರವೇ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲಾಗುವುದು ಹಾಗೂ ಮುಂಬರುವ ಸಭೆಯಲ್ಲಿ ಪರಿಹಾರ ಘೋಷಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೆಳೆ ವಿಮೆ ಮತ್ತು ಉದ್ಯೋಗ ಭರವಸೆ:
ಈ ಬಾರಿ ಜಿಲ್ಲಾಡಳಿತದ ಜಾಗೃತಿಯಿಂದಾಗಿ ಸುಮಾರು 40,000 ಖುಷ್ಕಿ ಜಮೀನಿನ ಪೈಕಿ 37,000 ರೈತರು ಬೆಳೆ ವಿಮೆ ಮಾಡಿಸಿದ್ದಾರೆ. ವಿಮೆ ವ್ಯಾಪ್ತಿಗೆ ಬಾರದ ರೈತರಿಗೆ ತಾಂತ್ರಿಕ ತೊಡಕುಗಳಿದ್ದರೆ ಅದನ್ನು ಪರಿಶೀಲಿಸಿ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು. ‘ವಿಬಿ ಜಿ ರಾಮ್ ಜಿ’ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ ಹಾಗೂ ದಿನಗೂಲಿಯನ್ನು 12 ರೂಪಾಯಿ ಹೆಚ್ಚಿಸಲಾಗಿದೆ. ಕೂಲಿ ಒದಗಿಸುವಲ್ಲಿ ಬಳ್ಳಾರಿ ಜಿಲ್ಲೆ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದೆ. ತಾಂಡಾದವರು ಕೆಲಸಕ್ಕಾಗಿ ಬೇರೆ ಜಿಲ್ಲೆಗೆ ವಲಸೆ ಹೋಗುವುದನ್ನು ತಡೆಯಲು ವಿಶೇಷ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕೈಗಾರಿಕಾ ಮಾಲಿನ್ಯ ಹಾಗೂ ಸಾರ್ವಜನಿಕ ಆರೋಗ್ಯ:
ಸಂಡೂರು ವ್ಯಾಪ್ತಿಯ ಕೈಗಾರಿಕೆಗಳಿಂದ ಧೂಳು ಹೆಚ್ಚಾಗುತ್ತಿದ್ದು, ಕೆರೆಗಳಿಗೆ ಕಲುಷಿತ ನೀರು ಬಿಡಲಾಗುತ್ತಿದೆ. ಇದರಿಂದ ಮೀನುಗಳು ಸಾಯುತ್ತಿದ್ದು, ನೀರು ಕುಡಿದ ಜನರಿಗೆ ಮೂಳೆ ಸಂಬAಧಿತ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂಬ ದೂರುಗಳು ವ್ಯಾಪಕವಾಗಿವೆ. ಹೀಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳನ್ನು ಕರೆಸಿ ಶೀಘ್ರವೇ ಸಭೆ ನಡೆಸಲಾಗುವುದು. ಕೈಗಾರಿಕೆಗಳು ವೈಜ್ಞಾನಿಕವಾಗಿ ಫಿಲ್ಟರ್ಗಳನ್ನು ಅಳವಡಿಸಿ ಮಾಲಿನ್ಯ ನಿಯಂತ್ರಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ತ್ಯಾಜ್ಯ ನೀರು ಮತ್ತು ಮಾಲಿನ್ಯ ತಡೆಗೆ ಎಸ್ಟಿಪಿ ನಿರ್ಮಾಣ:
ಕುರೆಕುಪ್ಪ ಮತ್ತು ದರೋಜಿ ಭಾಗಗಳಲ್ಲಿ ಹರಿಯುವ ತ್ಯಾಜ್ಯ ನೀರು ಕೆರೆ-ಕೊಳ್ಳಗಳಿಗೆ ಸೇರಿ ನೀರು ಕಲುಷಿತಗೊಳ್ಳುತ್ತಿರುವುದು ಶಾಸಕರು ಮತ್ತು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಮಾಲಿನ್ಯದಿಂದ ಬೆಳೆ ನಷ್ಟವಾಗುತ್ತಿದ್ದು, ತ್ಯಾಜ್ಯ ನೀರು ಮತ್ತು ಫ್ಯಾಕ್ಟರಿ ನೀರು ಕಲುಷಿತಗೊಳ್ಳುವುದನ್ನು ತಡೆಯಲು ಎಸ್ಟಿಪಿ ಘಟಕವನ್ನು ಸ್ಥಾಪಿಸಲಾಗುವುದು. ಇದರಿಂದ ಅರ್ಧದಷ್ಟು ಮಾಲಿನ್ಯದ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.
ತುಂಗಭದ್ರಾ ಜಲಾಶಯವು 80 ಟಿಎಂಸಿ ತಲುಪಿದ ನಂತರವೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆಯಲಾಗುತ್ತದೆ. ಮುಂದಿನ ದಿನಗಳಲ್ಲಿ ಸಲಹಾ ಸಮಿತಿಯ ಅಧ್ಯಕ್ಷರ ನೇಮಕವಾದ ತಕ್ಷಣವೇ ಈ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕೃತ ಮತ್ತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಸಂಡೂರು ಶಾಸಕರಾದ ಈ.ಅನ್ನಪೂರ್ಣ ಅವರು ಮಾತನಾಡಿ, ಸಂಡೂರು ತಾಲೂಕಿನಲ್ಲಿ ಈ ಬಾರಿ ತೀವ್ರ ಮಳೆ ಅಭಾವ ಎದುರಾಗಿದ್ದು, ರೈತರು ಮತ್ತು ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಡೂರು ತಾಲೂಕು ಸಾಮಾನ್ಯವಾಗಿ ಜಿಲ್ಲೆಯಲ್ಲೇ ಅತಿ ಹೆಚ್ಚು ಮಳೆ ಪಡೆಯುವ ಪ್ರದೇಶವಾಗಿದೆ. ಆದರೆ, ಈ ಬಾರಿ ಶೇಕಡಾ 67 ರಷ್ಟು ಮಳೆ ಕೊರತೆಯಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಈ ಕುರಿತು ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ತುರ್ತು ಪರಿಹಾರ ಕ್ರಮಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ನಮ್ಮ ತಾಲೂಕಿನಲ್ಲಿ ಕೃಷಿ ಭೂಮಿಯ ಲಭ್ಯತೆ ಅತ್ಯಂತ ಕಡಿಮೆಯಾಗಿದೆ. ಈ ಭಾಗವು ಬೆಟ್ಟಗುಡ್ಡಗಳಿಂದ ಕೂಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರೇ ಹೆಚ್ಚಾಗಿದ್ದಾರೆ. ಇಲ್ಲಿ ಕಂಪ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ದೊಡ್ಡ ಹಿಡುವಳಿದಾರರಿಗಿಂತ ಬಡ ರೈತರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರ ಬದುಕಿಗೆ ಈ ಸಣ್ಣ ಹಿಡುವಳಿ ಭೂಮಿಯೇ ಆಧಾರವಾಗಿದೆ. ಅಲ್ಲದೆ, ಜಿಲ್ಲೆಯಲ್ಲಿ ಗಣಿಗಾರಿಕೆ ಚಟುವಟಿಕೆಗಳು ಬಹಳಷ್ಟು ಸ್ಥಗಿತಗೊಂಡಿರುವುದರಿಂದ ಜನರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಮುಂಗಾರು ಮಳೆ ತಡವಾಗಿ ಬಂದಿದ್ದರಿಂದ ಬಿತ್ತನೆ ಮಾಡಿದ ಬೆಳೆಗಳು ಸಂಪೂರ್ಣವಾಗಿ ಕೈಗೆ ಸಿಗದಂತಾಗಿವೆ. ಕೇವಲ ರೈತರಷ್ಟೇ ಅಲ್ಲದೆ, ದನ-ಕರುಗಳಿಗೂ ಕುಡಿಯುವ ನೀರು ಹಾಗೂ ಮೇವಿನ ತೀವ್ರ ಕೊರತೆ ಎದುರಾಗಿದೆ. ತಾಲೂಕಿನ ನೈಜ ಪರಿಸ್ಥಿತಿಯ ಕುರಿತು ಸರ್ಕಾರಕ್ಕೆ ಸೂಕ್ತ ವರದಿ ಸಲ್ಲಿಸಿ, ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಪರಿಹಾರ ಘೋಷಿಸಬೇಕೆಂದು ಶಾಸಕರು, ಸಚಿವರಿಗೆ ಮನವಿ ಮಾಡಿದರು.
ಜಾನುವಾರುಗಳ ಮೇವಿನ ಲಭ್ಯತೆ ಮತ್ತು ಮೇವಿನ ಬ್ಯಾಂಕ್ ಸ್ಥಾಪನೆ:
ಸಂಡೂರು ತಾಲೂಕಿನಲ್ಲಿ ವಿಠಲಾಪುರ, ಗಂಗಲಾಪುರ, ಮೆಟ್ರಿಕಿ, ರಾಜಾಪುರ ಸೇರಿದಂತೆ 21 ಹಳ್ಳಿಗಳ ವ್ಯಾಪ್ತಿಯಲ್ಲಿ ಸುಮಾರು 9,000 ಜಾನುವಾರುಗಳಿವೆ. ತಾಲೂಕು ಮಟ್ಟದಲ್ಲಿ ಒಟ್ಟು 44,292 ಜಾನುವಾರುಗಳಿವೆ. ಪ್ರಸ್ತುತ ಲಭ್ಯವಿರುವ ಒಣ ಮೇವಿನ ದಾಸ್ತಾನು ಮುಂದಿನ ಒಂದು ತಿಂಗಳ ಕಾಲ ನಿರ್ವಹಣೆಗೆ ಸಾಕಾಗುತ್ತದೆ. ಮೆಕ್ಕೆಜೋಳ ಮತ್ತು ಜೋಳದ ದಂಟನ್ನು ದಾಸ್ತಾನು ಮಾಡಲಾಗಿದೆ. ಮೇವಿನ ಅಭಾವವಿರುವ ವಿಠಲಾಪುರ ಮತ್ತು ಮೆಟ್ರಿಕಿ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇವಿನ ಬ್ಯಾಂಕ್ ಸ್ಥಾಪಿಸಲು ನಿರ್ಧರಿಸಲಾಗಿದೆ. ರೈತರು ದೂರದ ಪ್ರದೇಶಗಳಿಗೆ ಜಾನುವಾರುಗಳನ್ನು ಕರೆದೊಯ್ಯುವುದನ್ನು ತಪ್ಪಿಸಲು ಆಯಾ ಪಂಚಾಯಿತಿ ಮಟ್ಟದಲ್ಲೇ ಮೇವಿನ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನಾ ಇಲಾಖಾಧಿಕಾರಿಗಳು ಸಚಿವರ ಗಮನಕ್ಕೆ ತಂದರು.
ಈ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಜಂಟಿ ಕೃಷಿ ನಿರ್ದೇಶಕ ಕೆ.ಸೋಮಸುಂದರ್, ಸಂಡೂರು ತಹಶೀಲ್ದಾರ ಅನಿಲ್ ಕುಮಾರ್ ಸೇರಿದಂತೆ ಪಶು ಸಂಗೋಪನಾ ಇಲಾಖೆ, ತೋಟಗಾರಿಕೆ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ರೈತರು, ಸಾರ್ವಜನಿಕರು ಹಾಜರಿದ್ದರು.
