[ವರದಿ : ಜಿ ಎಂ ಬಸಯ್ಯ]
ಕುರುಗೋಡು: ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಬೋವಿ–ವಡ್ಡರ ಸಮಾಜದ ಅಭಿವೃದ್ಧಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು ಎಂದು ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಹೇಳಿದರು.
ಪಟ್ಟಣದ ಕಂಪ್ಲಿ ರಸ್ತೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 2025–26ನೇ ಸಾಲಿನ ಅನುದಾನದಡಿ ₹1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಬೋವಿ ಸಮಾಜದ ಸಮುದಾಯ ಭವನದ ಕಾಮಗಾರಿಗೆ ಶಾಸಕ ಜೆ.ಎನ್. ಗಣೇಶ್ ಅವರು ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕುಡಿಯುವ ನೀರು, ಸಿಸಿ ರಸ್ತೆ, ಚರಂಡಿ, ಸಮುದಾಯ ಭವನ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಕ್ಷೇತ್ರವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬೋವಿ–ವಡ್ಡರ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ವಿ. ರಾಮಾಂಜಿನೇಯು ಮಾತನಾಡಿ, ಬೋವಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ₹1 ಕೋಟಿ ಅನುದಾನ ದೊರೆತಿರುವುದು ಬಳ್ಳಾರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಎಂದು ಸಂತಸ ವ್ಯಕ್ತಪಡಿಸಿದರು.
ಸಮುದಾಯ ಭವನಕ್ಕೆ ಇಷ್ಟೊಂದು ದೊಡ್ಡ ಮೊತ್ತದ ಅನುದಾನ ದೊರೆಯಲು ಶಾಸಕ ಜೆ.ಎನ್. ಗಣೇಶ್ ಅವರ ಪರಿಶ್ರಮ ಹಾಗೂ ಕಾಳಜಿಯೇ ಪ್ರಮುಖ ಕಾರಣ ಎಂದು ಅವರು ತಿಳಿಸಿದರು. ಸಮಾಜದ ಅಭಿವೃದ್ಧಿಗೆ ಶಾಸಕರು ನೀಡುತ್ತಿರುವ ಸಹಕಾರವನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಬೋವಿ ಸಮಾಜದ ಮುಖಂಡರು, ಪಕ್ಷದ ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
