[ವರದಿ : ಜಿ ಎಂ ಬಸಯ್ಯ]
ಬಳ್ಳಾರಿ: ರಾಜ್ಯದ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಹಾಗೂ ಪರಿಣಾಮಕಾರಿಯಾಗಿ ಇಂಗ್ಲಿಷ್ ಬೋಧಿಸಲು ಶಿಕ್ಷಕರಿಗೆ ಅನುಕೂಲವಾಗುವ ಉದ್ದೇಶದಿಂದ ಸರ್ಕಾರ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಎ.ಕೆ. ಜಲಾಲಪ್ಪ ತಿಳಿಸಿದರು.
ಬಳ್ಳಾರಿ ಸಮೀಪದ ಜೋಳದರಾಶಿ ಅಲೆಮಾರಿ (ಮೀನಳ್ಳಿ) ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಜಾಯ್ಫುಲ್ ಇಂಗ್ಲಿಷ್ ಲರ್ನಿಂಗ್’ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಆರನೇ ಮತ್ತು ಏಳನೇ ತರಗತಿಗೆ ಪ್ರವೇಶ ಪಡೆಯುವ ಬಹುತೇಕ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು ಬಂದಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಕೆಯನ್ನು ಸುಲಭ ಹಾಗೂ ಆಸಕ್ತಿದಾಯಕವಾಗಿಸಲು ಈ ಕಾರ್ಯಾಗಾರ ಅತ್ಯಂತ ಉಪಯುಕ್ತವಾಗಿದೆ. ಶಿಕ್ಷಕರು ಕಾರ್ಯಾಗಾರದಲ್ಲಿ ಕಲಿತ ಚಟುವಟಿಕೆ ಆಧಾರಿತ ಬೋಧನಾ ವಿಧಾನಗಳನ್ನು ತಮ್ಮ ತರಗತಿಗಳಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಬೇಕು ಎಂದು ಜಲಾಲಪ್ಪ ಸಲಹೆ ನೀಡಿದರು.
ಕಾರ್ಯಾಗಾರದಲ್ಲಿ ಭಾಗವಹಿಸಿದ ಶಿಕ್ಷಕರು ತರಬೇತಿಯ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳಲ್ಲಿ ಇಂಗ್ಲಿಷ್ ಭಾಷೆಯ ಬಗ್ಗೆ ಆಸಕ್ತಿ ಮತ್ತು ಆತ್ಮವಿಶ್ವಾಸ ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಎ.ಕೆ. ಜಲಾಲಪ್ಪ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಇಂಗ್ಲಿಷ್ ಸಂಪನ್ಮೂಲ ವ್ಯಕ್ತಿಗಳಾದ ಬಸವರಾಜ್ ಮತ್ತು ಕೊಟ್ರೇಶ್ ಅವರನ್ನು ಸಹ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಜಟ್ಟಿ ಆಂಜನೇಯ, ಪ್ರಥಮ್ ಫೌಂಡೇಶನ್ನ ಸಂಯೋಜಕ ಪರಶುರಾಮ್, ಸಂಪನ್ಮೂಲ ವ್ಯಕ್ತಿಗಳಾದ ಬಸವರಾಜ್, ಕೊಟ್ರೇಶ್, ವಿನಯಪಾಲಕ ಹೊನ್ನೂರ್ ನಾಯಕ್ ಹಾಗೂ ಶಿಕ್ಷಕಿ ಸುನೀಲಾ ಏಂಜಲ್ ಸೇರಿದಂತೆ ಶಿಕ್ಷಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಶಿಕ್ಷಕಿ ಸುನೀಲಾ ಏಂಜಲ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
