ಸಂಡೂರು/ನಂದಿಹಳ್ಳಿ: ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ದೇಶಕ್ಕೆ ಗೌರವ ನೀಡುವುದರ ಜೊತೆಗೆ ತಮ್ಮ ಹಕ್ಕುಗಳನ್ನು ಅರಿತು, ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ, ನಂದಿಹಳ್ಳಿ ನಿರ್ದೇಶಕ ಡಾ. ತಿಪ್ಪೇಸ್ವಾಮಿ ಹೇಳಿದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ನಾತಕೋತ್ತರ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರವೂ ಮಹತ್ವದ್ದಾಗಿದೆ. ಸಂವಿಧಾನ ನಮಗೆ ನೀಡಿರುವ ಹಕ್ಕುಗಳಷ್ಟೇ ಅಲ್ಲದೆ, ದೇಶದ ಬಗ್ಗೆ ನಮ್ಮ ಜವಾಬ್ದಾರಿಯನ್ನೂ ನೆನಪಿಸುತ್ತದೆ. ಹೀಗಾಗಿ ರಾಷ್ಟ್ರದ ಏಕತೆ, ಸಮಗ್ರತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಯೋಜನೆಗಳು ಹಾಗೂ ಅಭಿವೃದ್ಧಿಯ ಪರಿಕಲ್ಪನೆಯಿಂದಾಗಿ ಮುಂದಿನ 20 ವರ್ಷಗಳಲ್ಲಿ ಭಾರತ ವೈಜ್ಞಾನಿಕ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಮತ್ತಷ್ಟು ಪ್ರಗತಿ ಸಾಧಿಸಿ ವಿಕಸಿತ ಭಾರತವಾಗಿ ರೂಪುಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿನ ಬೆಳವಣಿಗೆಯೊಂದಿಗೆ ಶಿಕ್ಷಣ, ಸಂಶೋಧನೆ, ಉದ್ಯಮ, ಕೃಷಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿಯೂ ದೇಶ ಮುನ್ನಡೆಯಬೇಕಿದೆ. ಯುವಜನತೆ ಜ್ಞಾನ, ಕೌಶಲ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದರು.
ನಿವೃತ್ತ ಸಿಬ್ಬಂದಿಗೆ ಸನ್ಮಾನ
ಇದೇ ಸಂದರ್ಭದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಬಂಡ್ರಪ್ಪ ಹಾಗೂ ಶಾಂತಮ್ಮ ಹಾಗೂ ಆಕಸ್ಮಿಕವಾಗಿ ನಿಧನರಾದ ಗಾರ್ಡನ್ ವರ್ಕರ್ ಏಕೆ ಸಂಡೂರಪ್ಪ ಅವರ ಪತ್ನಿ ಅವರನು ಗೌರವಿಸಿ ಸನ್ಮಾನಿಸಲಾಯಿತು.
ಅವರ ಸೇವೆಯನ್ನು ಸ್ಮರಿಸಿದ ಗಣ್ಯರು, ಸಂಸ್ಥೆಯ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಬೆಳವಣಿಗೆಯಲ್ಲಿ ನಿವೃತ್ತ ಸಿಬ್ಬಂದಿಯ ಕೊಡುಗೆ ಮಹತ್ವದ್ದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಡಾ. ಸುಮಾ, ಡಾ. ಶರತ್, ಡಾ. ಚೌಡಪ್ಪ, ಡಾ. ಅಶ್ವಿನ್ ಕುಮಾರ್, ಲಕ್ಷ್ಮಣ ತೊಳಿ, ನಾಗರಾಜ್ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ರೀಡಾ ಸಹಾಯಕ ಕೆ. ಪಾಪಯ್ಯ ಕಾರ್ಯಕ್ರಮ ನಿರ್ವಹಿಸಿದರು. ಸಹಾಯಕ ಕ್ರೀಡಾ ನಿರ್ದೇಶಕ ಶಿವರಾಮಪ್ಪ ರಾಗಿ ವಂದನಾರ್ಪಣೆ ಸಲ್ಲಿಸಿದರು.
