ವರದಿ: ಶಿವರಾಜ್ ಕನ್ನಡಿಗ
ಕೊಟ್ಟೂರು: ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ಮಂಗಳವಾರ ಮುಖ್ಯಾಧಿಕಾರಿಗಳ ನೇತೃತ್ವದಲ್ಲಿ ಕಿರಿಯ ಅಭಿಯಂತರರು ಹಾಗೂ ಆರೋಗ್ಯ ನಿರೀಕ್ಷಕರು ಭೇಟಿ ನೀಡಿ ಆಹಾರದ ಗುಣಮಟ್ಟ ಮತ್ತು ಕ್ಯಾಂಟೀನ್ನ ಸ್ವಚ್ಛತೆ ಪರಿಶೀಲಿಸಿದರು.
ಕ್ಯಾಂಟೀನ್ನಲ್ಲಿ ಆಹಾರ ತಯಾರಿಸುವ ಸ್ಥಳ, ಅಡುಗೆ ಸಾಮಗ್ರಿಗಳು, ಕುಡಿಯುವ ನೀರು, ಆಹಾರ ಸಂಗ್ರಹಣೆ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು ಎಂದು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಾರ್ವಜನಿಕರಿಗೆ ಪ್ರತಿದಿನ ತಾಜಾ, ಸ್ವಚ್ಛ ಹಾಗೂ ಗುಣಮಟ್ಟದ ಆಹಾರ ದೊರೆಯುವಂತೆ ನೋಡಿಕೊಳ್ಳಬೇಕು. ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ಶುಚಿತ್ವದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕ್ಯಾಂಟೀನ್ ಸುತ್ತಮುತ್ತಲಿನ ಪರಿಸರವನ್ನೂ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳು ಸೂಚಿಸಿದರು.
ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ಗಳನ್ನು ನಡೆಸಲಾಗುತ್ತಿದ್ದು, ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಅಧಿಕಾರಿಗಳು ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.
