[ವರದಿ : ಜಿ ಎಂ ಬಸಯ್ಯ]
ಕುರುಗೋಡು: ಪಟ್ಟಣದ ಬಳ್ಳಾರಿ ರಸ್ತೆಯ ಬಳಿ ₹2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ಬುಧವಾರ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರು ಭೂಮಿಪೂಜೆ ನೆರವೇರಿಸಿದರು.
ಭೂಮಿಪೂಜೆ ಕಾರ್ಯಕ್ರಮಕ್ಕೂ ಮುನ್ನ ವಾಲ್ಮೀಕಿ ಸಮುದಾಯದ ವತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನೂರಾರು
ಬೈಕ್ಗಳೊಂದಿಗೆ ರ್ಯಾಲಿ ನಡೆಯಿತು.
ನಂತರ ನಡೆದ ಸಮಾರೋಪ ಸಭೆಯಲ್ಲಿ ಮಾತನಾಡಿದ ಶಾಸಕ ಜೆ.ಎನ್. ಗಣೇಶ್, ಸಮುದಾಯದ ಮದುವೆ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ಸುಸಜ್ಜಿತ ಸಮುದಾಯ ಭವನ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು ಹಾಗೂ ಸಂದೇಶಗಳನ್ನು ಸಮಾಜದಲ್ಲಿ ಮತ್ತಷ್ಟು ವ್ಯಾಪಕವಾಗಿ ಪ್ರಚುರಪಡಿಸುವ ಅಗತ್ಯವಿದೆ. ಸಮುದಾಯದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ತಾಲೂಕು ಅಧ್ಯಕ್ಷ ಎನ್. ನಾಗರಾಜ್ ಮಾತನಾಡಿ, ಸಮುದಾಯದ ಅಭಿವೃದ್ಧಿಗೆ ಶಾಸಕ ಜೆ.ಎನ್. ಗಣೇಶ್ ಅವರು ನೀಡುತ್ತಿರುವ ಕೊಡುಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಾಲಕರು ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಮಂಜುನಾಥ, ಪುರಸಭೆ ಕಾರ್ಯನಿರ್ವಾಹಕ ಅಧಿಕಾರಿ ದತ್ತಾತ್ರೇಯ ಹೆಗಡೆ, ಸಿಪಿಐ ಬಾಳನಗೌಡ ಮಾನಶೆಟ್ಟಿ, ಪಿಎಸ್ಐ ಸುಪ್ರೀತ್ ವಿರುಪಾಕ್ಷಪ್ಪ, ಪುರಸಭೆ ಸದಸ್ಯರು, ಕ್ಷೇತ್ರದ ಮುಖಂಡರು, ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
